


ಬಂಟ್ವಾಳ: ಕೆಲಸದ ವಿಚಾರದಲ್ಲಿ ಉಂಟಾದ ತಕರಾರು ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದೆ.

ಪಿಲಾತಬೆಟ್ಟು ನಿವಾಸಿ ಶೇಖರ (43) ಅವರ ದೂರಿನಂತೆ, ಮೇ 31ರ ರಾತ್ರಿ ಅವರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಕುಟುಂಬ ಸದಸ್ಯರು ಹಾಜರಿದ್ದರು. ಈ ವೇಳೆ ಶೇಖರ ಅವರ ಸಹೋದರ ಮಧುಸೂದನ್ (37) ಅವರು ತಮ್ಮ ಸಂಬಂಧಿಕನಾದ ರಾಹುಲ್ ಜೊತೆ ಕೆಲಸದ ವಿಚಾರದಲ್ಲಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ.


ಇದರಿಂದ ಕೋಪಗೊಂಡ ರಾಹುಲ್ ಅಲ್ಲಿಂದ ತೆರಳಿದ್ದನು. ಕಾರ್ಯಕ್ರಮ ಮುಗಿದ ಬಳಿಕ ಮನೆಯ ಸಮೀಪ ಬೊಬ್ಬೆ ಕೇಳಿಬಂದ ಹಿನ್ನೆಲೆಯಲ್ಲಿ ಶೇಖರ ಸ್ಥಳಕ್ಕೆ ತೆರಳಿದಾಗ, ರಾಹುಲ್ ಬಿಯರ್ ಬಾಟಲಿಯಿಂದ ಮಧುಸೂದನ್ ಅವರ ಕುತ್ತಿಗೆಗೆ ತಿವಿದಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್ ಅವರನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 58/2026ರಡಿ ಕಲಂ 103 ಬಿಎನ್ಎಸ್-2023 ಅನ್ವಯ ಪ್ರಕರಣ ದಾಖಲಾಗಿದ್ದು, ಆರೋಪಿ ರಾಹುಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
