



ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ, ಹೊಸ ಮುಖ್ಯಮಂತ್ರಿ (CM) ಬಂದರೂ ಯಾವುದೇ ಬದಲಾವಣೆ ಆಗುವುದಿಲ್ಲ, ಅಭಿವೃದ್ಧಿಯೂ ಸಾಧ್ಯವಿಲ್ಲ. ನಾಡಿನ ಜನರ ವಿಶ್ವಾಸ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ (Congress) ಜನರಿಗೆ ಸಂಪೂರ್ಣವಾಗಿ ಮೋಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ (Kalaburagi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಹಿಂದುಳಿದ ವರ್ಗಗಳ ವಿವಾದಾತ್ಮಕ ಜಾತಿಸಮೀಕ್ಷೆ ವರದಿ ಕುರಿತು ಸರಣಿ ಆರೋಪ ಮಾಡಿದರು.ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗೆ ಸಂಬಂಧಿಸಿದಂತೆ ಲೇವಡಿ ಮಾಡಿದ ವಿಜಯೇಂದ್ರ, ಗ್ಯಾರಂಟಿ ಯೋಜನೆಗಳಿಗೆ ಹಣ ವಿನಿಯೋಗ ಮಾಡಲು ಸರ್ಕಾರ ಈಗಾಗಲೇ ಹರಸಾಹಸ ಪಡುತ್ತಿದೆ. ಒಂದು ವೇಳೆ ನಾಯಕತ್ವ ಬದಲಾವಣೆಯಾಗಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುವುದಿಲ್ಲ. ಸಿಎಂ ಕುರ್ಚಿಯಲ್ಲಿ ಕೂತರೂ ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ನಿಭಾಯಿಸುವುದರಲ್ಲೇ ಶಿವಕುಮಾರ್ ಅವರಿಗೆ ಎರಡು ವರ್ಷ ಕಳೆದುಹೋಗುತ್ತದೆ ಎಂದರು.

ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ಘೋರ ಅನ್ಯಾಯ ಎಸಗಿದ್ದಾರೆ. ಸುಮಾರು 400 ಕೋಟಿ ರೂ. ವೆಚ್ಚದ ಕಾಂತರಾಜು ವರದಿಯನ್ನು ಹಾಳುಗೆಡವಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಅವರು ಹಿಂದುಳಿದ ವರ್ಗಗಳಿಗೆ ಯಾವುದೇ ನ್ಯಾಯ ಒದಗಿಸಿಲ್ಲ. ಪ್ರಸ್ತುತ ಚರ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಜಾತಿಸಮೀಕ್ಷೆ ವರದಿ ತೀರಾ ಅವೈಜ್ಞಾನಿಕವಾಗಿದೆ ಎಂದು ಕಿಡಿಕಾರಿದರು.
