


ಕಬಕ ಗ್ರಾಮದಲ್ಲಿ ನಿನ್ನೆ (01/06/2026) ಮಧ್ಯಾಹ್ನ 3 ಗಂಟೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಇಂದು ಕೂಡ ವಿದ್ಯುತ್ ಪೂರೈಕೆ ಪುನಃಸ್ಥಾಪನೆಯಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

1912 ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಿದಾಗ, “ಮರ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದು, ದುರಸ್ತಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಇದೆ” ಎಂಬ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.


ಗ್ರಾಮಸ್ಥರ ಪ್ರಕಾರ, 2024ರಲ್ಲಿ ಕಬಕ ವಿಭಾಗದಲ್ಲಿ ಮೂರು ಲೈನ್ಮನ್ಗಳು ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಪ್ರಸ್ತುತ ಒಬ್ಬ ಲೈನ್ಮನ್ಗೆ ಕಬಕ, ಕೊಡಿಪಾಡಿ ಹಾಗೂ ಪಡ್ನೂರು ಸೇರಿದಂತೆ ಮೂರು ಗ್ರಾಮಗಳ ಜವಾಬ್ದಾರಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಇದರಿಂದ ವಿದ್ಯುತ್ ದುರಸ್ತಿ ಕಾರ್ಯಗಳು ವಿಳಂಬವಾಗುತ್ತಿದ್ದು, 24 ಗಂಟೆಗಳಿಗೂ ಹೆಚ್ಚು ಕಾಲ ವಿದ್ಯುತ್ ಇಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.
“ಇದೇನಾ ಗ್ಯಾರಂಟಿ ಸರ್ಕಾರದ ಆಡಳಿತ?” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ವಿದ್ಯುತ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕಬಕ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯ ಮತ್ತು ದುರಸ್ತಿ ಕಾರ್ಯಗಳಲ್ಲಿ ಆಗುತ್ತಿರುವ ವಿಳಂಬದ ಹಿನ್ನೆಲೆ, ಹೆಚ್ಚುವರಿ 3 ಲೈನ್ಮನ್ಗಳನ್ನು ನೇಮಿಸುವಂತೆ ಗ್ರಾಮಸ್ಥರು ಶಾಸಕರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.
ವಿದ್ಯುತ್ ತೊಂದರೆಗಳು ಹೆಚ್ಚಾಗುತ್ತಿದ್ದರೂ ಸಿಬ್ಬಂದಿ ಕೊರತೆಯಿಂದ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತು ಹಲವು ಬಾರಿ ಗಮನಕ್ಕೆ ತಂದಿದ್ದರೂ ಇದುವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
