



ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ (Malaviya Nagar) ರೆಸ್ಟೋರೆಂಟ್ವೊಂದರಲ್ಲಿ ಭಾರೀ ಬೆಂಕಿ ಅವಘಡ (Fire Accident) ಸಂಭವಿಸಿದೆ. ಪರಿಣಾಮ ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು (ಜೂ.3) ಬೆಳಿಗ್ಗೆ8:50ರ ಸುಮಾರಿಗೆ ರೆಸ್ಟೋರೆಂಟ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿದ್ದವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಕಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಕೆಲವರು ವಿದೇಶಿಯರಾಗಿದ್ದು, ಮಧ್ಯ ಏಷ್ಯಾ ಮತ್ತು ಆಫ್ರಿಕಾದವರು ಎನ್ನಲಾಗಿದೆ. ಜೊತೆಗೆ 37 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಪಿಎಂ ಕಚೇರಿ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿರುವುದು ದುರಂತದ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಮತ್ತು ಚಿಕಿತ್ಸೆಯನ್ನು ಒದಗಿಸಲು ಅಧಿಕಾರಿಗಳು ಸ್ಥಳದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
